Wednesday, 24 September 2008

ಚಿತ್ರ ೭೧



ಚಿತ್ರ ೭೧ ಕ್ಕೆ ತವಿಶ್ರೀ ಮತ್ತು ಸತೀಶ್ ಅವರು ಬರೆದ ಕವನಗಳು ಹೀಗಿವೆ

ತವಿಶ್ರೀ ಅವರ ಕವನ -
ಸಿರಿ ನಾಡು


ಇತ್ತ ನೋಡು ಕಲ್ಪವೃಕ್ಷಗಳ ನಾಡು
ಸುತ್ತಲೂ ಹರಡುತಿದೆ ರವಿಯ ತಂಪಿನ ಜಾಡು
ಕಂಗೊಳಿಸುತಿಹುದು ಲಲಿತ ಕಲೆಗಳ ಬೀಡು
ಜಾನುವಾರು ಹಕ್ಕಿಗಳು ಸೇರುತಿವೆ ಗೂಡು

ಯಾರೆಂದರು - ಸಾಯುತಿಹುದು ಈ ನಾಡು
ಬೆಳಗಿ ಜಗಮಗಿಸುತಿಹುದು ಕಗ್ಗತ್ತಲೆಯ ಕಾಡು
ಬೆಳಕ ಮೂಡಿಸಿದುದು, ರವಿ ಮೀರಿಸಿದ ಕವಿ
ಬೆಳಕಿನ ಜಾಡ ಹುಡುಕು ಹೊರಟಿಹನು ರವಿ

ಎಂದಿನಂತೆ ಬೈಗಿನಲಿ ಕಣ್ಬಿಟ್ಟನು ನಮ್ಮ ರವಿ
ಸುತ್ತಲೂ ಕತ್ತಲಿನ ಬದಲು ಕಂಗೊಳಿಸುವ ಸವಿ
ಮೂಗಿಗೆ ಬಡಿಯುತಿಹುದು ಶ್ರೀಗಂಧದ ಹವೆ
ಭೂತಾಯಿಯ ಮಡಿಲಿನಿಂದ ಹೊರಹೊಮ್ಮುತಿಹುದು ಹಬೆ

ಹಸಿದು ಬಳಲಿದವಗೆ ತಂಪೆರೆಯುವ ಬೊಂಡ
ಉಡುಗುತಿಹ ಶಕ್ತಿಗೆ ಚೈತನ್ಯ ತುಂಬುವ ಹಯನು
ಜಗವ ಸಾಗಿಸುತಿಹ ಚಕ್ರದ ಚಕ್ಕದ ಬಂಡಿ
ಯಾರೂ ಕಂಡಿರದ ಹೊನ್ನಿನ ಗಿಂಡಿ

ನಗರಗಳ ಜಂಜಾಟದ ಸೋಂಕಿರದ
ಹಳ್ಳಿನಾಡಿದು ನಾಗರೀಕತೆಯ ಬುನಾದಿ
ಯಾವುದಿದೀ ವಿಪರೀತದ ಶಕ್ತಿ?
ಪಂಚಭೂತಗಳಿಗೂ ಸಡ್ಡೊಡೆಯುವ ಯುಕ್ತಿ
ಸಿರಿಯ ಮಡಿಲಲಿ ತುಂಬಿ ತುಳುಕಿಸಿಹ ಕನ್ನಡಮ್ಮ
ಅಹರ್ನಿಶಿ ಇರಲಿ ಇವಳ ಮೇಲೆ ನಮ್ಮೆಲ್ಲರ ಭಕ್ತಿ


ಸತೀಶ್ ಅವರ ಕವನ -
ಎಲ್ಲೂ ನಿಲ್ಲದ ನಡೆ

ಕಗ್ಗತ್ತಲು ಕಾಡುವಾಗ ನೆಲೆಸಿತ್ತು ಶಾಂತಿ
ಬಾನ ರವಿ ಬಂದ ಕ್ಷೋಭೆಗಳ ತಂದ
ಭುವಿಯನ್ನು ಬೆಳಗಿ ಓಟದಲಿ ಪಳಗಿ
ಮತ್ತೆ ಕತ್ತಲಾಗುತ್ತಿದ್ದಂತೆ ನಾಚಿ ನೀರಾಗಿ
ತನ್ನ ಆವರಣದಲಿ ಓಕುಳಿ ಚೆಲ್ಲಿ
ಎಲ್ಲಾ ಕಡೆಗೂ ಕಿರಣಗಳು ಚೆಲ್ಲಾಪಿಲ್ಲಿ
ಹರಡುವಂತೆ ಮಾಡಿ ದಿನನಿತ್ಯದ ಮೋಡಿ
ಕತ್ತಲನು ಸುತ್ತ ಹರವಿ ಮತ್ತೆಲ್ಲೋ ಓಡುತಿಹನು ರವಿ.

ಇವನ್ನೆಲ್ಲಾ ನೋಡಿಯೂ ನೋಡದೆಯೇ
ತಲೆತೂಗುವ ತೆಂಗುಗಳ ತಪ್ಪೇನು
ಮುಗಿಲಿನೆಡೆಗೆ ಚಿಮ್ಮುವ ಮರದುತ್ಸಾಹಕೆ
ಅಡ್ಡ ಬೀಸುವ ಗಾಳಿ-ಕಿರಣಗಳ ಒಪ್ಪೇನು.

ಇಲ್ಲಿ ಸತ್ತು ಮತ್ತಿನ್ನೆಲ್ಲೋ ಹುಟ್ಟುವ ಸೂರ್ಯ
ದಿನ ಸಾಯುವವರಿಗೆ ಅಳುವ ಕಾರ್ಯ
ಜೋಪಡಿಯಲ್ಲಿ ಜೊಂಪಿನಲಿ ಮಲಗಿ
ಆಸೆ ಕಂಡಂತೆ ಸುಖನಿದ್ರೆಯಲಿ ಮುಲುಗಿ
ಕಂಡೂ ಕೈಗೆ ಸಿಗದ ಕನಸುಗಳ ನಂಬಿ
ಕಿರಣಗಳು ಹಾಯಿ ದೋಣಿಯ ತುಂಬಿ
ಒಂದು ಎಡೆಯಿಂದ ಮತ್ತೊಂದು ಕಡೆಗೆ
ಎಂದೋ ಹೊರಟ ಎಲ್ಲೂ ನಿಲ್ಲದ ನಡೆಗೆ.

Tuesday, 16 September 2008

ಚಿತ್ರ ೭೦



ಚಿತ್ರ ೭೦ ಕ್ಕೆ ತವಿಶ್ರೀ, ಕುಮಾರ ಸ್ವಾಮಿ ಕಡಾಕೊಳ್ಳ ಮತ್ತು ಸತೀಶ್ ಅವರು ಬರೆದ ಕವನಗಳು ಹೀಗಿವೆ

ತವಿಶ್ರೀ ಅವರ ಕವನ -

ಯಾಕುಂದೇಂದು ತುಷಾರ ಹಾರ ಧವಳಾ
ಯಾ ಶುಭ್ರ ವಸ್ತ್ರಾನ್ವಿತಾ
ಯಾ ವೀಣಾ ವರದಂಡ ಮಂಡಿತ ಕರಾ
ಯಾ ಶ್ವೇತ ಪದ್ಮಾಸನಾ ...

ಕಂಡಲ್ಲೆಲ್ಲಾ ಕಾಣುವುದು ಕಪ್ಪು ಬಿಳುಪು
ಕೆಳಗೆ ಜಾರುತಿಹುದು ಜಾರಿಸುತಿಹುದು ಹಿಮ
ಅಲ್ಲಲ್ಲಿ ಅದರಡಿ ಕಾಣುತಿಹುದು ಕರಿಕಲ್ಲು
ದಿಗಂತದಲಿ ಕಣ್ಮುಚ್ಚಾಲೆ ಆಡುತಿಹುದು ಕಾಮನಬಿಲ್ಲು

ಅಪ್ಪ ಅಮ್ಮ ಅಣ್ಣ ಅಕ್ಕ ತಮ್ಮ ತಂಗಿ
ಎಲ್ಲರೂ ಏರಿಸಿರುವುದು ಕಪ್ಪನೆಯ ಚೊಣ್ಣ ಷರಾಯಿ
ಇವಗೆ ಏರಿಸಿರುವುದು ಕೆಂಪನೆಯ ದಿರಿಸು
ಕೆಲವರಿಗೆ ಮಾತ್ರವಂತೆ ಕೈಗೆ ಗವಸು

ಅಲ್ಲಲ್ಲಿ ಅಬ್ಬೇಪಾರಿಯಾಗಿ ನಿಂತಿಹವು ಬೋಳು ಮರಗಳು
ಎಂದು ನೆಲಕಚ್ಚುವೆನೋ ಎಂಬ ಹೆದರಿಕೆ
ಕಾಲಿಟ್ಟ ಕಡೆ ಜೊರ್ರನೆ ಜಾರುವ ಜಾರಿಕೆ
ಮಜ ಮಾಡಲು ಏಕೆ ಹಿಂಜರಿಕೆ

ದೀಪವಿರದ ಕಂಬಗಳು
ಬೆಳಗಿನ ಹೊತ್ತಿನಲ್ಲೂ ಆವರಿಸಿರುವುದು ಕತ್ತಲು
ಅಲ್ಲಲ್ಲಿ ಕಾಂಬರುವ ನೆಲದಲಿನ ಹೊಂಡಗಳು
ಭೂ ತಾಯಿಯ ಮೊಗದಲಿ ಸಿಡುಬಿನ ಕಲೆಗಳು

ಕುಹಕರದೂ ತಲೆಯ ಕಾಯಲು
ಕುಹಕವರಿಯದ ಛತ್ರಿಗಳು
ಎಲ್ಲಿದ್ದರೇನ್ ಯಾರಾದರೇನ್
ತನು ಬಿಚ್ಚಿ ನಿಲ್ಲುವುದು ಕಾಯಕವಲ್ಲವೇನ್

ಅಲ್ಲಿ ನಿಂತಿರುವುದೊಂದು ಮುರುಕು ಮಂಟಪ
ಯಾರೂ ಹೇಳುವವರಿಲ್ಲ ಅಯ್ಯೋ ಪಾಪ!
ಕೈಯಿಲ್ಲ ತನುವಿಲ್ಲ
ರಕ್ಷಕನಾಗಿರಲು ಕಾಲು ತಲೆ ಎರಡೇ ಸಾಕಲ್ಲ

ಆರ್ತಸ್ವರದಲ್ಲಿ ಕೇಳಿಬರುತಿದೆ
’ಎಮ್ಮ ಪ್ರಾಣ ಸಂಕಟ
ನಿಮಗೆ ಮೋಜಿನ ಕೋಣೆಯಾ?’


ಕುಮಾರ ಸ್ವಾಮಿ ಕಡಾಕೊಳ್ಳ ಅವರ ಕವನ -

ಬೆಳ್ಳಿಯಂತೆ ಹರಡಿದೆ
ಸುತ್ತಲೂ ಬಿಳಿ ನೀರ್ಗಲ್ಲು
ಮುತ್ತಿದೆ ಆಡಲು ಮಂದಿ
ಸುರಿವ ಮಂಜನಲ್ಲೂ

ಬಾನು ಕವಿದಿದೆ ಮಂಜು
ನೆಲವು ಮುತ್ತಿದೆ ಮಂಜು
ಮರೆಯಾಗಿದೆ ಮರದೆಲೆ
ಹುದುಗಿ ಹೋಗಿದೆ ಮನೆ

ಮಯ್ಕೊರೆವ ಚಳಿಯಲ್ಲೂ
ಮಯ್ಮರೆತಿದೆ ಮಂದಿ
ಮಾತೆಲ್ಲ ನಡುಗುತಿರೆ
ಆವಿಯಾಗುತಿದೆ ಉಸಿರು

ಆಟಕ್ಕೆ ಅಣಿಯಾಗಿ
ತುಂಟರು ಜೊತೆಯಾಗಿ
ಹೊದ್ದು ಬಂದಿಹರು
ದಪ್ಪ ತುಪ್ಪಳ ಅಂಗಿ

ಗಾಳಿಯ ಸುಳಿವಿಲ್ಲ
ಬೆಳಗಿನ ಸೆಳಪಿಲ್ಲ
ಕವಿದಂತೆ ಕಾವಳು
ತಳವೆಳಗು ತಲೆಯೋಳು

ನೀರ್ಗಲ್ಲು ಬಿರಿಯಾದರು
ಕರಗುವುದು ಬಿಸಿತಾಗಲು
ಮೂಡ ನನ್ನೀ ಮನವು
ಅರಿಯದೊ ನಿಸರ್ಗವನು

** ಕುಕೂಊ....
ಪುಣೆ


ಸತೀಶ್ ಅವರ ಕವನ -
ಏನು ಮಾಯೆ ಯಾವ ಮೋಹ


ಒಂದು ರೂಪ ಆಕಾರದಿಂದ ಇನ್ನೊಂದಕೆ
ಬದಲಾಯಿಸುವ ಎಲ್ಲೆಡೆ ನೀರು ನೀರು
ಒಂದು ಕಾಲ ಆಕಾಶದಿಂದ ಮತ್ತೊಂದಕೆ
ಹರಿ ಹಾಯುವ ನೀರಿನ ಜೋರು ಜೋರು.

ಒಂದು ಚಿತ್ರ ಮತ್ತೊಂದನು ಬೇರ್ಪಡಿಸುವ
ಭ್ರಮೆಯ ನೆರಳನು ದೂರುವ ಏಕ ಚಿತ್ತ
ಒಂದು ಕಣ ಅದರ ಗುಂಪನು ಹೋಲದಿರುವ
ಕೊಳೆಯ ಮೇಲೆ ಬಿಳಿ ಹಾಸು ಸುತ್ತ ಮುತ್ತ.

ಕಪ್ಪು ಕತ್ತಲ ಕಣಗಳ ಒಡಲಲ್ಲಿ ಹುದುಗಿಕೊಂಡು
ಬರಿ ಬೆಳಕನ್ನು ಬಿಂಬಿಸೋ ಭ್ರೆಮೆಯೇ
ಕಪ್ಪು ಆಕಾಂಕ್ಷೆಗಳ ಕುದಿಸಿ ಒಳಗಿಟ್ಟುಕೊಂಡು
ಸುಕ್ಕಿನ ಮುಖವನ್ನು ಸಮನಾಗಿಸೋ ಕ್ಷಮೆಯೆ.

ಏನು ಲೀಲೆ ಯಾವ ಚಿತ್ತ ದಿನಕೊಂದರ ವಿಶೇಷ
ಬೆಚ್ಚಗೆ ಹೊದ್ದ ನೆಲವ ಬೆಚ್ಚಗೆ ಹೊದ್ದು ನೋಡುವ ಪರಿ
ಏನು ಮಾಯೆ ಯಾವ ಮೋಹ ಉಳಿದ ಅವಶೇಷ
ಸಮನಾದ ಧೃವ ಪ್ರದೇಶ ಮುಚ್ಚಿಕೊಂಡ ಒರಟು ಗಿರಿ.